ಹೆದ್ದಾರಿ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಜಿಲ್ಲಾಧಿಕಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಂಡುಬರುವ ವಿವಿಧ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.

Feb 5, 2026 - 17:50
Feb 5, 2026 - 19:18
ಹೆದ್ದಾರಿ ಸಮಸ್ಯೆಗಳ  ತ್ವರಿತ ಪರಿಹಾರಕ್ಕೆ ಜಿಲ್ಲಾಧಿಕಾರಿ ಸೂಚನೆ
DC

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಂಡುಬರುವ ವಿವಿಧ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲು  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿ ವಿವಿದೆಡೆ ಅಪಘಾತಗಳನ್ನು  ತಡೆಗಟ್ಟಲು ರಸ್ತೆ ಅಗಲೀಕರಣ, ಬೈಪಾಸ್, ಫ್ಲೈ ಓವರ್ ಸೇರಿದಂತೆ ಒಟ್ಟು 24 ವಿವಿಧ ಕಾಮಗಾರಿಗಳನ್ನು ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಗುರುತಿಸಲಾಗಿತ್ತು. ಆದರೆ ಕೆಲವು ಪ್ರಮುಖ ಸ್ಥಳಗಳಲ್ಲಿ ಸಂಚಾರ ಕಾರಣ  ಮುಂದೊಡ್ಡಿ ಕಾಮಗಾರಿಗಳನ್ನು ಇನ್ನೂ ಕೈಗೊತ್ತಿಕೊಳ್ಳದಿರುವುದು ಕಂಡು ಬಂದಿದೆ. ಇದರಿಂದ ಸಂಚಾರ ಸಮಸ್ಯೆ ಇನ್ನಷ್ಟು ದಟ್ಟಣೆಯಾಗಿದೆ. ಸಂಚಾರ ಪೆÇಲೀಸ್ ಸಹಕಾರ ಪಡೆದು ಈ ಎಲ್ಲಾ ಕಾಮಗಾರಿಗಳನ್ನು ಮುಂದಿನ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಜಾವೇದ್ ಅಬ್ದುಲ್ಲಾ ಮಾತನಾಡಿ, ಕೂಳೂರು ಹೊಸ ಸೇತುವೆ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಶೀಘ್ರದಲ್ಲಿಯೇ ಸೇತುವೆಯ ಒಂದು ಭಾಗ ಪೂರ್ಣಗೊಳ್ಳಲಿದೆ. ಕೂಳೂರಿನಿಂದ ಬೈಕಂಪಾಡಿ ವರೆಗೆ ಒಟ್ಟು 6 ಲೇನ್‍ಗಳ  ಹೆದ್ದಾರಿ ನಿರ್ಮಾಣಗೊಳ್ಳಲಿದೆ. ಈ ರಸ್ತೆಯ ಎರಡೂ ಕಡೆಗಳಲ್ಲಿ ಪ್ರತ್ಯೇಕವಾಗಿ ಸರ್ವಿಸ್ ರಸ್ತೆಯೂ ಇರಲಿದೆ ಎಂದು ತಿಳಿಸಿದರು.
   

ರಾಷ್ಟ್ರೀಯ ಹೆದ್ದಾರಿಯಿಂದ ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ತಿರುವು ಪಡೆಯುವ ಜಂಕ್ಷನ್‍ನಲ್ಲಿ ಸಂಚಾರದಟ್ಟಣೆ ನಿಭಾಯಿಸಲು  ಹೊಸದಾಗಿ ರೈಲ್ವೆ ಅಂಡರ್‍ಪಾಸ್ ನಿರ್ಮಿಸಲು   ಮಂಜೂರಾತಿ ದೊರಕಿದ್ದು,  ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ  ಎಂದು ಅವರು ತಿಳಿಸಿದರು. ಜಿಲ್ಲಾಧಿಕಾರಿಗಳು ಮಾತನಾಡಿ, ರಾಷ್ಟ್ರೀಯ ಹೆದ್ದಾರಿ  ಕೂಳೂರು - ನಂತರ  ಭಾಗದಲ್ಲಿ ಬೀದಿದೀಪ ಅಳವಡಿಸಲು ಮಹಾನಗರಪಾಲಿಕೆ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು. ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಜಿಲ್ಲೆಯಲ್ಲಿ 2025 ರ ಅಕ್ಟೋಬರ್ 30 ರವರೆಗೆ  ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದ 720 ಪ್ರಕರಣಗಳನ್ನು ದಾಖಲಿಸಿ, ರೂ. 17.39 ಲಕ್ಷ ದಂಡ ಹಾಗೂ ಟಿಂಟೆಡ್ ಗ್ಲಾಸ್ ಅಳವಡಿಸಿದ ವಾಹನಗಳ ಮೇಲೆ  8066 ಪ್ರಕರಣ ದಾಖಲಿಸಿ,  ರೂ. 38.39  ಲಕ್ಷ ದಂಡ ವಿಧಿಸಲಾಗಿದೆ ಎಂದು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು.
   

ಕಲ್ಲಾಪು, ಜಪ್ಪಿನಮೊಗರು, ಮಹಾಕಾಳಿಪಡ್ಪು ಜಂಕ್ಷನ್‍ಗಳಲ್ಲಿ ಸಿಗ್ನಲ್‍ಗಳನ್ನು ಅಳವಡಿಸುವ ಬಗ್ಗೆ ಟ್ರಾಫಿಕ್ ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ  ಕ್ರಮಕೈಗೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಯಿತು. ನವಮಂಗಳೂರು ವ್ಯಾಪ್ತಿಯಲ್ಲಿ ಟ್ರಕ್, ಲಾರಿಗಳ ಪಾರ್ಕಿಂಗ್‍ಗೆ ತಣ್ಣೀರುಬಾವಿ ಮತ್ತು ಬೈಕಂಪಾಡಿಯಲ್ಲಿ ಎನ್.ಎಂ.ಪಿ.ಎ. ವತಿಯಿಂದ ಟ್ರಕ್ ಟರ್ಮಿನಲ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಸಭೆಗೆ ತಿಳಿಸಲಾಯಿತು. ಸಭೆಯಲ್ಲಿ  ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ ಅರುಣ್, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ,  ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ  ಮಹಮ್ಮದ್ ನಜೀರ್,  ಡಿಸಿಪಿ ರವಿಶಂಕರ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಾಘವೇಂದ್ರ ನಾಯ್ಕ್ ಮತ್ತಿತರರಿದ್ದರು.