ನೀಟ್ ಯುಜಿ ರದ್ದು: ಮರುಪರೀಕ್ಷೆ ನಿರ್ಧಾರಕ್ಕೆ ಕುಪ್ಮ ಕರ್ನಾಟಕ ಸ್ವಾಗತ

ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ

May 12, 2026 - 20:52
ನೀಟ್ ಯುಜಿ ರದ್ದು: ಮರುಪರೀಕ್ಷೆ ನಿರ್ಧಾರಕ್ಕೆ ಕುಪ್ಮ ಕರ್ನಾಟಕ ಸ್ವಾಗತ

ಮಂಗಳೂರು, ಮೇ 12: ಮೇ 3ರಂದು ನಡೆದಿದ್ದ ನೀಟ್ ಯುಜಿ-2026ರ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್‌ಟಿಎ) ತೆಗೆದುಕೊಂಡಿರುವ ನಿರ್ಧಾರವನ್ನು ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ (ಕುಪ್ಮ ಕರ್ನಾಟಕ) ಸ್ವಾಗತಿಸಿದೆ.

ಸಂಘದ ಅಧ್ಯಕ್ಷ ಡಾ.ಮೋಹನ್ ಆಳ್ವ ಮತ್ತು ಕಾರ್ಯದರ್ಶಿ ಪ್ರೊ. ನರೇಂದ್ರ ಎಲ್. ನಾಯಕ್ ಅವರು ಈ ಬಗ್ಗೆ ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದು, ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಸಿಬಿಐ ತನಿಖೆಗೆ ಆಗ್ರಹ: ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಅಕ್ರಮಗಳಿಂದಾಗಿ ಸುಮಾರು 23 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರಿದೆ. ವರ್ಷಪೂರ್ತಿ ಕಠಿಣ ಪರಿಶ್ರಮ ಪಟ್ಟು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಲ್ಲಿ ಈ ಬೆಳವಣಿಗೆ ಆತಂಕ ಮೂಡಿಸಿದೆ. ಸಂಪೂರ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಮೂಲಕ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಭರವಸೆಯ ವಾತಾವರಣ ನಿರ್ಮಾಣವಾಗಲಿ: ಕೇಂದ್ರ ಸರ್ಕಾರವು ಇನ್ನು ಮುಂದೆ ಇಂತಹ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆಯದಂತೆ ಎಚ್ಚರವಹಿಸಬೇಕು. ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಮತ್ತು ನಂಬಿಕೆ ಮೂಡಿಸುವಂತಹ ವಾತಾವರಣವನ್ನು ಸೃಷ್ಟಿಸಬೇಕೆಂದು ಕುಪ್ಮ ಒತ್ತಾಯಿಸಿದೆ.