ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮಕೈಗೊಳ್ಳದ ಹರಿಯಾಣ, ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಛೀಮಾರಿ

ದೆಹಲಿ ಮತ್ತು ಎನ್‌ಸಿಆರ್ ಭಾಗದಲ್ಲಿ ಉದ್ಭವಿಸುವ ವಾಯು ಮಾಲಿನ್ಯ ಸಮಸ್ಯೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳದ ಹರಿಯಾಣ ಮತ್ತು ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ.

Oct 16, 2024 - 08:13
 6
ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮಕೈಗೊಳ್ಳದ ಹರಿಯಾಣ, ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಛೀಮಾರಿ

ನವದೆಹಲಿ: ದೆಹಲಿ ಮತ್ತು ಎನ್‌ಸಿಆರ್ ಭಾಗದಲ್ಲಿ ಉದ್ಭವಿಸುವ ವಾಯು ಮಾಲಿನ್ಯ ಸಮಸ್ಯೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳದ ಹರಿಯಾಣ ಮತ್ತು ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಮುಂದಿನ ವಿಚಾರಣೆಗೆ ಎರಡು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಖುದ್ದು ಹಾಜರಾಗಿ ಕೋರ್ಟ್ ಆದೇಶ ಪಾಲನೆ ಮಾಡದಿರಲು ಕಾರಣಗಳೇನು ಎಂದು ವಿವರಿಸುವಂತೆ ತಾಕೀತು ಮಾಡಿದೆ.ಎರಡೂ ರಾಜ್ಯಗಳಲ್ಲಿ ಹುಲ್ಲು ಸುಡುವ ಪ್ರಕರಣಗಳಲ್ಲಿ ಗಣನೀಯ ಹೆಚ್ಚಳ ಕಂಡು ಬಂದಿದೆ. ಇದರ ವಿರುದ್ಧ ಸರ್ಕಾರ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ. ಹರಿಯಾಣ ಸರ್ಕಾರ ಸಲ್ಲಿಸಿರುವ ಅಫಿಡೆವಿಟ್‌ನಲ್ಲಿ ಸುಳ್ಳು ಮಾಹಿತಿಗಳಿವೆ. ಹುಲ್ಲು ಸುಡುವ ಪ್ರಕರಣ ವರದಿಯಾಗಿಲ್ಲ ಎಂದು ಸರ್ಕಾರ ಹೇಳುತ್ತದೆ. ಆದರೆ ಸ್ಯಾಟಲೈಟ್ ಚಿತ್ರಗಳಲ್ಲಿ ಬೆಂಕಿ ಹೊತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ನಿಮಗೆ ನಾಚಿಕೆಯೇ ಎಂದು ಕೋರ್ಟ್ ಪ್ರಶ್ನಿಸಿತು.

ಹರಿಯಾಣ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸದ್ಯ ದಾಖಲಾಗಿರುವ ದೂರುಗಳ ವಿರುದ್ಧ ಒಂದು ವಾರದಲ್ಲಿ ಕ್ರಮ ಕೈಗೊಳ್ಳದಿದ್ದರೆ, ಕೋರ್ಟ್ ಆದೇಶ ಪಾಲನೆ ಮಾಡದಿದ್ದರೆ ಅವರ ವಿರುದ್ಧ ನ್ಯಾಯಂಗ ನಿಂದನೆ ದಾಖಲು ಮಾಡಬೇಕಾಗುತ್ತದೆ. ವಾಯು ಮಾಲಿನ್ಯ ರಾಜಕೀಯ ವಿಷಯವಲ್ಲ, ಇಂತಹ ವಿಚಾರದಲ್ಲಿ ಅಧಿಕಾರಿಗಳಿಗೆ ಒತ್ತಡ ಹೇರುವವರಿಗೂ ನಾವು ಸಮನ್ಸ್ ಮಾಡಬೇಕಾಗುತ್ತದೆ ಎಂದು ಕೋರ್ಟ್ ಎಚ್ಚರಿಕೆ ನೀಡಿತು.ಪಂಜಾಬ್ ಸರ್ಕಾರವು ಮಾಲಿನ್ಯ ನಿಯಂತ್ರಣಕ್ಕೆ ಸಮರ್ಪಕ ಕೆಲಸ ಮಾಡಿಲ್ಲ. ಹೀಗಾಗಿ ಮುಂದಿನ ವಿಚಾರಣೆ ವೇಳೆ ಹರಿಯಾಣ ಮತ್ತು ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಖುದ್ದು ಹಾಜರಾಗಬೇಕು. ಮಾಲಿನ್ಯ ನಿಯಂತ್ರಣಕ್ಕೆ ಕ್ರಮ ವಹಿಸದ ಅಧಿಕಾರಿಗಳ ವಿರುದ್ಧ ಯಾಕೆ ಕ್ರಮ ವಹಿಸಿಲ್ಲ ಎಂಬುದನ್ನು ವಿವರಿಸಬೇಕು ಎಂದು ಕೋರ್ಟ್ ಹೇಳಿದೆ.ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ವಾಯು ಗುಣಮಟ್ಟ ನಿರ್ವಹಣಾ ಆಯೋಗವು ವಿಶೇಷವಾಗಿ ಹುಲ್ಲು ಸುಡುವಿಕೆಗೆ ಸಂಬಂಧಿಸಿದಂತೆ ಹೊರಡಿಸಿದ ಆದೇಶಗಳನ್ನು ಪಾಲಿಸದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.