ಚಿನ್ನ, ಇಂಧನ ಬೆಲೆ ಏರಿಕೆ ಬಗ್ಗೆ ಪ್ರಧಾನಿ ಯಾಕೆ ಮಾತನಾಡುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸಚಿವರು, ಅಧಿಕಾರಿಗಳಿಗೆ ಸಾರ್ವಜನಿಕ ಸಾರಿಗೆ ಬಳಸಲು ಸೂಚಿಸಲಿ, ಬಿಜೆಪಿ ಶಾಸಕರು, ನಾಯಕರು, ಕಾರ್ಯಕರ್ತರಿಂದ ತ್ಯಾಗ ಪ್ರಾರಂಭವಾಗಲಿ, ಬೆಂಗಳೂರಿಗೆ ಗ್ಯಾರಂಟಿ ಯೋಜನೆ; ಮೇ 13ರಂದು ಪ್ರಕಟ ಎಂದು ಡಿಸಿಎಂ

May 11, 2026 - 19:45
ಚಿನ್ನ, ಇಂಧನ ಬೆಲೆ ಏರಿಕೆ ಬಗ್ಗೆ ಪ್ರಧಾನಿ ಯಾಕೆ ಮಾತನಾಡುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:  ‘ಚಿನ್ನ ಖರೀದಿ ಮಾಡಬೇಡಿ, ಇಂಧನ ಬಳಕೆ ಕಡಿಮೆ ಮಾಡಿ ಎಂದು ಸಲಹೆ ನೀಡುತ್ತಿರುವ ಪ್ರಧಾನ ಮಂತ್ರಿಗಳು, ಇವುಗಳ ಬೆಲೆ ಏರಿಕೆಯಾಗಿದ್ದು ಯಾಕೆ? ಯಾರಿಂದ ಬೆಲೆ ಏರಿಕೆಯಾಗಿದೆ ಎಂಬುದನ್ನು ವಿವರಿಸಬೇಕು’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದರು.

ಬೆಂಗಳೂರಿನ ಸರ್ಕಾರಿ ನಿವಾಸ ಕುಮಾರಪಾರ್ಕ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೇಶದ ಜನರಿಗೆ ಕೊಟ್ಟಿರುವ ಸಲಹೆ ಬಗ್ಗೆ ಕೇಳಿದಾಗ, ‘ಮದುವೆ, ಮುಂಜಿ ಮಾಡುವವರು ಚಿನ್ನ ತೆಗೆದುಕೊಳ್ಳಬೇಡಿ ಎಂದು ಹೇಳಲು ಸಾಧ್ಯವೇ? ಅವರು ಸಲಹೆಗಳನ್ನು ನೀಡುತ್ತಾರೆ. ಹಿಂದೆ ಕೋವಿಡ್ ಬಂದಾಗ ದೀಪ ಹಚ್ಚಿಸಿ, ಚಪ್ಪಾಳೆ ತಟ್ಟಿಸಿದರು. ಅದರಿಂದ ಸಮಸ್ಯೆ ನಿಂತು ಹೋಯಿತಾ? ಮದುವೆಯಾದ ಮಹಿಳೆ ಚಿನ್ನದ ತಾಳಿ, ಸರ ಹಾಕಿಕೊಳ್ಳುವುದನ್ನು ಬೇಡ ಎನ್ನಲು ಸಾಧ್ಯವೇ? ಅವರ ಬದುಕಿನಲ್ಲಿ ಕಷ್ಟವೋ ಸುಖವೋ, ಸಾಲ ಮಾಡಿ ಚಿನ್ನ ಖರೀದಿ ಮಾಡುತ್ತಾರೆ. ಎಲ್ಲರನ್ನೂ ಸಾರ್ವಜನಿಕ ಸಾರಿಗೆಯಲ್ಲೇ ಓಡಾಡಿ ಎನ್ನುವುದಾದರೆ, ಪ್ರಧಾನ ಮಂತ್ರಿಗಳು ಕೇಂದ್ರ ಸರ್ಕಾರದ ಅಧಿಕಾರಿಗಳು ಸಾರ್ವಜನಿಕ ಸಾರಿಗೆಯಲ್ಲಿ ಓಡಾಡುವಂತೆ ಸೂಚಿಸಲಿ. ಅವರ ಕೇಂದ್ರ ಸಚಿವರಿಗೆ ತಾಕೀತು ಮಾಡಲಿ. ನಾವು ಮೊದಲು ನಡೆದುಕೊಂಡು ನಂತರ ಸಾಮಾನ್ಯ ಜನಕ್ಕೆ ಸಂದೇಶ ನೀಡಬೇಕು’ ಎಂದರು.

ಬಿಜೆಪಿಯಿಂದ ತ್ಯಾಗ ಪ್ರಾರಂಭವಾಗಲಿ: ಜಗತ್ತಿನ ಪರಿಸ್ಥಿತಿ ಸರಿಯಿಲ್ಲ ಕೆಲವೊಮ್ಮೆ ತ್ಯಾಗಕ್ಕೂ ಸಿದ್ಧವಾಗಿರಬೇಕು ಎಂಬ ಕಾರಣಕ್ಕೆ ಸಂದೇಶ ನೀಡಿದ್ದಾರೆ ಎಂದಾಗ, ‘ಮೊದಲು ತ್ಯಾಗವನ್ನು ಮಂತ್ರಿಗಳು, ಕೇಂದ್ರ ಸರ್ಕಾರದ ಸಚಿವರು, ಅಧಿಕಾರಿಗಳು, ಬಿಜೆಪಿ ಆಡಳಿತ ರಾಜ್ಯಗಳಲ್ಲಿರುವ ಅಧಿಕಾರಿಗಳಿಂದ, ಅವರ ಪಕ್ಷದ ಶಾಸಕರು, ನಾಯಕರು ಹಾಗೂ ಕಾರ್ಯಕರ್ತರಿಂದ ತ್ಯಾಗ ಆರಂಭವಾಗಲಿ. ನಂತರ ಬೇರೆಯವರಿಗೆ ತ್ಯಾಗದ ಸಲಹೆ ನೀಡಲಿ’ ಎಂದು ಡಿಕೆಶಿ ತಿರುಗೇಟು ನೀಡಿದರು.

ಬೆಂಗಳೂರಿಗೆ ಗ್ಯಾರಂಟಿ ಯೋಜನೆ; ಮೇ 13ರಂದು ಪ್ರಕಟ: ಭಾನುವಾರ ಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ಜಿಬಿಎ ಸಭೆ ಮಾಡಿದ ಬಗ್ಗೆ ಕೇಳಿದಾಗ, ‘ಸುರ್ಜೆವಾಲ ಅವರ ಜೊತೆ ರಾಜಕೀಯವಾಗಿ ಸಭೆ ಮಾಡಿದ್ದೇವೆ. ಅಧಿಕಾರಿಗಳನ್ನು ಕರೆದು ಕೆಲವು ಸೂಚನೆ ನೀಡಿದ್ದು, ಬೆಂಗಳೂರು ನಗರಕ್ಕೆ ದೊಡ್ಡ ಗ್ಯಾರಂಟಿಗಳನ್ನು ನೀಡುತ್ತಿದ್ದೇವೆ, ಈ ಬಗ್ಗೆ ಮೇ 13ರಂದು ಮಾಹಿತಿ ನೀಡುತ್ತೇವೆ’ ಎಂದು ತಿಳಿಸಿದರು.