ಕ್ವಾರಿ ದುರಂತ: ಅಧಿಕೃತ ವರದಿ ಬಂದ ನಂತರ ಕ್ರಮದ ಬಗ್ಗೆ ತೀರ್ಮಾನ.. ಸಿಎಂ ಡಿಕೆಶಿ

Bengaluru Quarry Disaster: Cm D.K Shivakumar Reaction: ಮಾಗಡಿ ರಸ್ತೆ ಬಳಿ ಕಲ್ಲು ಕ್ವಾರಿ ದುರಂತದ ಬಗ್ಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Jul 2, 2026 - 18:23
ಕ್ವಾರಿ ದುರಂತ: ಅಧಿಕೃತ ವರದಿ ಬಂದ ನಂತರ ಕ್ರಮದ ಬಗ್ಗೆ ತೀರ್ಮಾನ.. ಸಿಎಂ ಡಿಕೆಶಿ

ಬೆಂಗಳೂರು: ಮಾಗಡಿ ರಸ್ತೆ ಬಳಿ ಕಲ್ಲು ಕ್ವಾರಿಯಲ್ಲಿ ದುರಂತ ಸಂಭವಿಸಿದ್ದು, 7 ಮಂದಿ ಮೃತಪಟ್ಟಿತ್ತಿದ್ದಾರೆ. ಈ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಇಂದು (ಗುರುವಾರ) ಪ್ರತಿಕ್ರಿಯೆ ನೀಡಿದರು.

ಪೊಲೀಸ್ ಅಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದುರಂತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಫೋಟದಿಂದಾಗಿ ಇದು ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಈ ಕ್ವಾರಿ ಕಾನೂನುಬದ್ಧವಾಗಿ ನಡೆಸಲಾಗುತ್ತಿದೆಯೇ ಇಲ್ಲವೇ ಎಂಬ ವರದಿಯನ್ನು ಪಡೆದು, ಆ ಬಳಿಕ ಕ್ರಮ ಕೈಗೊಳ್ಳಲಾಗುವುದು. ಕ್ವಾರಿ ನಡೆಸುವಾಗ ಅದರದೇ ಆದ ನಿಯಮಗಳಿದ್ದು, ಅವುಗಳ ಪಾಲನೆಯಾಗುತ್ತಿವೆಯೇ ಇಲ್ಲವೇ ಎಂಬ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.

ಕಳೆದ ಬಾರಿ ಸ್ಫೋಟದ ವೇಳೆ ಚಿರತೆ ಸತ್ತಿತ್ತು. ಈ ಹಿಂದೆ ತನಿಖೆ ಮಾಡದೇ ಪ್ರಕರಣ ಮುಚ್ಚಿಹಾಕಲಾಗಿತ್ತು ಎಂಬ ಸ್ಥಳೀಯ ಶಾಸಕರ ಆರೋಪದ ಬಗ್ಗೆ ಕೇಳಿದಾಗ, 'ಶಾಸಕರು ನಮಗೆ ಮಾಹಿತಿ ನೀಡಿದ್ದು, ಅಧಿಕೃತ ವರದಿ ತರಿಸಿಕೊಂಡು, ಆ ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

ಪರಿಹಾರದ ವಿಚಾರವಾಗಿ ಪ್ರಶ್ನಿಸಿದಾಗ, 'ಮೊದಲು ಎಷ್ಟು ಜನ ಸತ್ತಿದ್ದಾರೆ ಎಂಬ ಮಾಹಿತಿಗಳು ಬರಲಿ, ಆನಂತರ ಪರಿಹಾರದ ಬಗ್ಗೆ ತೀರ್ಮಾನ ಮಾಡೋಣ. ತರಾತುರಿಯಲ್ಲಿ ಪರಿಹಾರ ಘೋಷಿಸಿದ ಮಾತ್ರಕ್ಕೆ ಸತ್ತವರು ಮರಳಿ ಬರುವುದಿಲ್ಲ. ಇದಕ್ಕೆಲ್ಲಾ ಅದರದೇ ಆದ ಪ್ರಕ್ರಿಯೆಗಳಿವೆ. ಖಂಡಿತವಾಗಿ ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಎಚ್ಚರಿಕೆ ವಹಿಸುವುದು ಬಹಳ ಮುಖ್ಯ' ಹೇಳಿದರು.