ಸಿಎಂ ಡಿಕೆಶಿ ದೆಹಲಿ ಪ್ರವಾಸ: ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂತಾ?
CM D.K.Shivakumar: ಸಚಿವ ಸಂಪುಟ ವಿಸ್ತರಣೆಗೆ ಸನಿಹವಾಗಿದ್ದು, ಅಂತಿಮ ಹಂತದ ಚರ್ಚೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು (ಮಂಗಳವಾರ) ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಸನಿಹವಾಗಿದ್ದು, ಅಂತಿಮ ಹಂತದ ಚರ್ಚೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K. Shivakumar) ಇಂದು (ಮಂಗಳವಾರ) ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಕಳೆದ ವಾರ ದೆಹಲಿಗೆ ತೆರಳಿದ್ದ ಸಿಎಂ ಡಿಕೆಶಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿದ್ದರು. ಆದರೆ, ಒಂದೆರಡು ಹೆಸರಿನ ವಿಷಯದಲ್ಲಿ ಅದು ಅಪೂರ್ಣವಾಗಿತ್ತು. ರಾಹುಲ್ ಗಾಂಧಿ ಹೊಸಬರಿಗೆ ಮಣೆ ಹಾಕುವಂತೆ ಸೂಚಿಸಿದ್ದರು. ನೂತನ ಪಟ್ಟಿಯೊಂದಿಗೆ ಡಿಕೆಶಿ, ರಾಹುಲ್ ಜೊತೆ ಚರ್ಚೆ ಮಾಡಿ, ಅಂತಿಮ ಒಪ್ಪಿಗೆ ಪಡೆಯುವ ನಿರೀಕ್ಷೆಯಿದೆ.
ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಜಾತಿ, ಪ್ರಾದೇಶಿಕ ಸಮತೋಲನ ಕಾಯ್ದುಕೊಂಡು ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ವರಿಷ್ಠರು ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಅದರಂತೆ ಸಿಎಂ ಡಿ.ಕೆ.ಶಿವಕುಮಾರ್ ಹೊಸ ಪಟ್ಟಿ ಸಿದ್ಧಪಡಿಸಿದ್ದಾರೆ ಎಂಬ ವಿವರಗಳು ಲಭ್ಯವಾಗಿವೆ. ಹಳಬರೊಂದಿಗೆ ಯುವಕರಿಗೆ ಮತ್ತು ಮಹಿಳೆಯರಿಗೆ ಆದ್ಯತೆ ನೀಡುವ ಲೆಕ್ಕಾಚಾರವು ಇದೆ.
ಈ ಬಾರಿ 8 ರಿಂದ 10 ಹೊಸ ಮುಖಗಳಿಗೆ ಅವಕಾಶ ಸಿಗುವ ನಿರೀಕ್ಷೆಯಿದೆ. ಕೆಲವು ಜಿಲ್ಲೆಗಳಿಗೆ ಈವರೆಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಅಸಮಾಧಾನವಿದೆ. ಅದನ್ನು ಹೋಗಲಾಡಿಸಲು ಆ ಜಿಲ್ಲೆಗಳಿಗೂ ಮಣೆ ಹಾಕಲು ಮುಂದಾಗಲಾಗಿದೆ ಎನ್ನಲಾಗಿದೆ.
ಸ್ಪೀಕರ್ ಯಾರು?
ಯು.ಟಿ.ಖಾದರ್ ಅವರಿಂದ ತೆರವಾಗಿರುವ ಸ್ಪೀಕರ್ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಬಗ್ಗೆಯೂ ತೀರ್ಮಾನಿಸುವ ಸಾಧ್ಯತೆಯಿದೆ. ಆಗಸ್ಟ್ 6 ರಿಂದ ಮಳೆಗಾಲದ ಅಧಿವೇಶನ ಶುರುವಾಗಲಿದ್ದು, 7 ರಂದು ವಿಧಾನಸಭಾಧ್ಯಕ್ಷರ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಸದ್ಯ ಬಿ.ಆರ್.ಪಾಟೀಲ್ ಹೆಸರು ಮುಂಚೂಣಿಯಲ್ಲಿದೆ. ಇವರೊಂದಿಗೆ ದಿನೇಶ್ ಗುಂಡೂರಾವ್, ಹೆಚ್.ಕೆ.ಪಾಟೀಲ್ ಮತ್ತು ಬಸವರಾಜ ರಾಯರಡ್ಡಿ ಸೇರಿದಂತೆ ಹಲವರ ಹೆಸರು ಕೇಳಿಬರುತ್ತಿವೆ. ಆದರೆ ಅಂತಿಮವಾಗಿ ಸ್ಪೀಕರ್ ಯಾರಾಗುತ್ತಾರೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿದೆ.