ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬಂದರೂ ಅಚ್ಚರಿಯಿಲ್ಲ: ವಿಜಯೇಂದ್ರ

ಶಿವಕುಮಾರ್ ನೇತೃತ್ವದ ಸಿದ್ದರಾಮಯ್ಯ ಕ್ಯಾಬಿನೆಟ್‍ನ ಮೊದಲ ವಿಕೆಟ್ ಪತನಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ

Jun 5, 2026 - 14:45
ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬಂದರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು, ಜೂನ್‌ 5: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಿದ್ದರಾಮಯ್ಯನವರ ಸಚಿವಸಂಪುಟದ ಮೊದಲನೇ ವಿಕೆಟ್ ಇವತ್ತು ಪತನವಾಗಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.

ಶುಕ್ರವಾರ ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಮಲಿಂಗಾರೆಡ್ಡಿಯವರು ಹಿರಿಯರಿದ್ದಾರೆ. ಅವರ ಬಗ್ಗೆ ಮಾತನಾಡಲು ಹೋಗುವುದಿಲ್ಲ; ಕಾಂಗ್ರೆಸ್ಸಿನವರಿಗೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಚಿಂತನೆ ಇಲ್ಲ ಎಂಬುದು ವಾಸ್ತವಿಕ ಸತ್ಯ ಎಂದರು.

ನಾಡಿನ ರೈತರ ಸಮಸ್ಯೆ ಪರಿಹಾರದ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಅವರು ಟೀಕಿಸಿದರು.

ಹಗ್ಗಜಗ್ಗಾಟದಲ್ಲೇ 3 ವರ್ಷ ಕಳೆದಿದ್ದಾರೆ. ಯಾವುದೇ ಒಬ್ಬ ಸಚಿವರು ನಾಮಕಾವಾಸ್ತೆ ಉಸ್ತುವಾರಿ ಸಚಿವರಾಗಿದ್ದರು. ರಾಜ್ಯದ ಸಚಿವರು ತಮ್ಮ ಜಿಲ್ಲೆಗೆ ಸೀಮಿತವಾಗಿದ್ದರೇ ಹೊರತು ಯಾವುದೇ ಇತರ ಜಿಲ್ಲೆಗೆ ಪ್ರವಾಸ ಮಾಡಿಲ್ಲ. ಈಗ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಇರುವುದು ಕೇವಲ 2 ವರ್ಷ ಮಾತ್ರ. ಈಗ ಮತ್ತೆ ಹಗ್ಗಜಗ್ಗಾಟ, ಯಾವ ಖಾತೆ, ಯಾವ ಜಿಲ್ಲೆ ಉಸ್ತುವಾರಿ ಪಡೆದುಕೊಳ್ಳಬೇಕೆಂಬ ಕಿತ್ತಾಟದಲ್ಲಿ ಇವತ್ತು ರಾಮಲಿಂಗಾರೆಡ್ಡಿಯವರು ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು.

ಬಿಜೆಪಿ ಸರಕಾರ ಬರಬೇಕೆಂಬ ನಿರೀಕ್ಷೆ, ಅಪೇಕ್ಷೆ ಜನರಲ್ಲಿದೆ..

ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸರಕಾರದಿಂದ ಅಭಿವೃದ್ಧಿ ನೋಡಲು ಸಾಧ್ಯವಿಲ್ಲ. ಜನರ ಭರವಸೆಗಳನ್ನು ಇವರು ಕಡೆಗಣಿಸಲಿದ್ದಾರೆ. ಬಡವರ ವಿರೋಧಿ, ಜನವಿರೋಧಿ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯಬೇಕು; ಮುಂದೆ ಬಿಜೆಪಿ ಸರಕಾರ ಬರಬೇಕೆಂಬ ನಿರೀಕ್ಷೆ, ಅಪೇಕ್ಷೆ ಜನರಲ್ಲಿದೆ ಎಂದು ತಿಳಿಸಿದರು. ಪರಸ್ಪರ ಕಾಲೆಳೆಯುತ್ತ ಸಮಯ ಕಳೆಯಲಿದ್ದು, ಮಧ್ಯಂತರ ಚುನಾವಣೆ ಬಂದರೂ ಅಚ್ಚರಿಯಿಲ್ಲ ಎಂದು ವಿಜಯೇಂದ್ರ ತಿಳಿಸಿದರು.

ರಾಜ್ಯದ ಮತದಾರರು ಬದಲಾವಣೆ ಬಯಸುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಆಗಲು ನೂರಾರು ಕಾರಣಗಳಿವೆ. ಈಗ ಯಾವುದೇ ಸಂದರ್ಭದಲ್ಲಿ ಚುನಾವಣೆ ಬಂದರೂ ನಮ್ಮ ಕಾರ್ಯಕರ್ತರು ಸಜ್ಜಾಗಿದ್ದಾರೆ ಎಂದು ಹೇಳಿದರು.

ವಿಧಾನಪರಿಷತ್‍ನ 2 ಸ್ಥಾನ, ರಾಜ್ಯಸಭೆಯ ಒಂದು ಸ್ಥಾನದ ಸ್ಪರ್ಧಿಗಳ ಕುರಿತು ಕೇಂದ್ರದ ವರಿಷ್ಠರು ಇವತ್ತು ಅಥವಾ ನಾಳೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

 

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.