ಬೆಂಗಳೂರು: ರಾಜ್ಯ ಸರ್ಕಾರವು ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 750 ಭೂಮಾಪಕರ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಶನಿವಾರದಿಂದ (ಜುಲೈ 11) ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ.
ಈ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ತುಂಬಲಾಗುತ್ತದೆ. ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸಂಬಂಧಪಟ್ಟ ವಿಷಯದಲ್ಲಿ ಡಿಪ್ಲೋಮಾ, ಎಂಜಿನಿಯರಿಂಗ್ ಪದವಿ ಅಥವಾ ಬಿಎಸ್ಸಿ ಉತ್ತೀರ್ಣರಾಗಿರಬೇಕು.
ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ.
ಆಯ್ಕೆಯಾದವರಿಗೆ ತಿಂಗಳಿಗೆ ರೂ.37,500 ರಿಂದ ರೂ.76,100 ವೇತನ ಲಭ್ಯವಾಗಲಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 7 ಕಡೆ ದಿನವಾಗಿದೆ. ಸಾಮಾನ್ಯ, 2ಎ/ 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ ರೂ.750, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ರೂ.500 ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.