ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮತ್ತೊಂದು ವಿಘ್ನ ಎದುರಾಗಿದೆ. ದೆಹಲಿಯಲ್ಲಿ ಕಾಕ್ರೋಚ್ ಪಾರ್ಟಿ ಹೋರಾಟ ನಡೆಯುತ್ತಿದೆ. ಕಾಂಗ್ರೆಸ್ ಬೆಂಬಲಿಸಿದ್ದು, ಪ್ರತಿಭಟನೆಗೆ ಇಳಿದಿದೆ. ಈ ಹಿನ್ನೆಲೆ ಸಂಪುಟ ವಿಸ್ತರಣೆ ಮಾತುಕತೆ ಮುಂದಕ್ಕೆ ಹೋಗಿದೆ.
ಇಂದು (ಬುಧವಾರ) ಸಂಪುಟ ವಿಸ್ತರಣೆಗೆ ಸಿದ್ಧತೆ ಮಾಡಿಕೊಂಡಿದ್ದ ಸಿಎಂ ಡಿ.ಕೆ.ಶಿವಕುಮಾರ್ ಅವರು, ಪ್ರಮಾಣ ವಚನಕ್ಕೆ ರಾಜ್ಯಪಾಲರ ಅನುಮತಿಯನ್ನು ಪಡೆದಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಹೈಕಮಾಂಡ್ ಸೂಚನೆ ಮೇರೆಗೆ ಈ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಮಂಗಳವಾರ ಬೆಳಗ್ಗೆ ದೆಹಲಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ತೆರಳಿದ್ದರು. ಎಲ್ಲವು ಅಂದುಕೊಂಡಂತೆ ನಡೆದಿದ್ದರೆ, ಇಂದೇ ನೂತನ ಸಚಿವರ ಪ್ರಮಾಣ ವಚನ ನಡೆಯಬೇಕಿತ್ತು. ಆದರೆ ದೆಹಲಿಯ ರಾಜಕೀಯ ವಾತಾವರಣವೇ ಬದಲಾಗಿದೆ.
ದಿನವಿಡೀ ನೀಟ್ ಹೋರಾಟದಲ್ಲಿ ಭಾಗಿಯಾಗಿದ್ದ ಡಿ.ಕೆ.ಶಿವಕುಮಾರ್ ಅವರಿಗೆ, ಮಂಗಳವಾರ ಸಂಜೆವರೆಗೂ ಸಭೆಗೆ ಸಮಯ ಸಿಗಲಿಲ್ಲ. ಈ ಹೋರಾಟದಿಂದಾಗಿ ಹೈಕಮಾಂಡ್ ನಾಯಕರು, ಸಂಪುಟ ವಿಸ್ತರಣೆ ಬಗ್ಗೆ ಗಮನ ಹರಿಸಲಿಲ್ಲ. ಆದರೂ ಜನ್ಮದಿನಕ್ಕೆ ಶುಭಾಶಯ ಕೋರುವ ನೆಪದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ, ಈ ವಿಚಾರದ ಕುರಿತ ಚರ್ಚಿಸಲಾಯಿತು.
ಅದರ ಹೊರತಾಗಿ ರಾಹುಲ್ ಗಾಂಧಿ ಇಡೀ ದಿನ ಹೋರಾಟದಲ್ಲಿ ಭಾಗಿಯಾಗಿದ್ದರಿಂದ ರಾಜ್ಯ ನಾಯಕರ ಭೇಟಿಗೆ ಸಮಯ ಸಿಗಲಿಲ್ಲ. ಹೀಗಾಗಿ ಸಂಪುಟ ವಿಸ್ತರಣೆ ಮತ್ತೆ ಮುಂದಕ್ಕೆ ಸಾಗಿದೆ.