ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ.. ರೈತರ ಪರವಾಗಿ ಹೋರಾಟ ಮುಂದುವರಿಕೆ
B.Y.Vijayendra: ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ, ರಾಜ್ಯ ಸರ್ಕಾರದ ನಡೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಂಡ್ಯ: ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ, ರಾಜ್ಯ ಸರ್ಕಾರದ ನಡೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y.Vijayendra) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಕ್ಕೆ ಬಂದ ನಂತರ, ರೈತರ ಸಂಕಷ್ಟವನ್ನು ಸಂಪೂರ್ಣವಾಗಿ ಮರೆತಿದ್ದಾರೆ ಎಂದು ಆರೋಪಿಸಿದ್ದಾರೆ.
ಇಂದು (ಶುಕ್ರವಾರ) ಕೆಆರ್ಎಸ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂದರ್ಭದಲ್ಲಿ ಅವರು ಮಾತನಾಡಿರು, ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ಸರ್ಕಾರ ರಾಜಕೀಯ ಲೆಕ್ಕಾಚಾರ ನಡೆಸುತ್ತಿದೆ ಎಂದು ಟೀಕಿಸಿದ್ದಾರೆ.

ಕೇಂದ್ರ ಸರ್ಕಾರ ಬರದ ಮುನ್ಸೂಚನೆ ನೀಡಿದ್ದರೂ, ರಾಜ್ಯ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಿಲ್ಲ. ಬದಲಾಗಿ, ಅದರ ಗಮನವೆಲ್ಲ ಅಧಿಕಾರದ ಒಳಜಗಳ ಹಾಗೂ ಕುರ್ಚಿ ರಾಜಕಾರಣದತ್ತವೇ ಇತ್ತು. ಪರಿಣಾಮ, ರೈತರ ಬದುಕಿನೊಂದಿಗೆ ಚೆಲ್ಲಾಟ ಆಡಲಾಯಿತು ಎಂದು ದೂರಿದ್ದಾರೆ.
ಡಿ.ಕೆ.ಶಿವಕುಮಾರ್, ಈ ಹಿಂದೆ ನೀರಾವರಿ ಸಚಿವ ಹಾಗೂ ಉಪಮುಖ್ಯಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕಾವೇರಿ ವಿಚಾರದ ಸಂಪೂರ್ಣ ಅರಿವು ಇದ್ದರೂ ತಮಿಳುನಾಡಿಗೆ ನೀರು ಬಿಡುಗಡೆಗೆ ಒಪ್ಪಿಗೆ ನೀಡಿರುವುದು ರೈತರಿಗೆ ಅನ್ಯಾಯವಾಗಿದೆ. ದೆಹಲಿಗೆ ಹಲವು ಬಾರಿ ತೆರಳಿ ಪಕ್ಷದ ನಾಯಕತ್ವದೊಂದಿಗೆ ಸಭೆ ನಡೆಸಿದರೂ, ಕಾವೇರಿ ಕೊಳ್ಳದ ರೈತರ ಹಿತಾಸಕ್ತಿಗಾಗಿ ಒಮ್ಮೆಯಾದರೂ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಿಲ್ಲ ಎಂದಿದ್ದಾರೆ.

ತಮಿಳುನಾಡು ನೀರು ಕೇಳುವ ಮೊದಲೇ, ಸುಮಾರು 3.5 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗಿದೆ. ಆ ವೇಳೆ ಸರ್ವಪಕ್ಷ ಸಭೆ ಕರೆಯುವ ಅಗತ್ಯ ಸರ್ಕಾರಕ್ಕೆ ಕಾಣಿಸಲಿಲ್ಲ. ಈಗ, ಸಭೆ ಕರೆಯುತ್ತಿರುವುದು 'ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ' ಎಂದು ವ್ಯಂಗ್ಯವಾಡಿದ್ದಾರೆ.
ಈಗಿನ ಸರ್ವಪಕ್ಷ ಸಭೆ ರೈತರ ಹಿತಕ್ಕಾಗಿ ಅಲ್ಲ, ಮುಖ್ಯಮಂತ್ರಿಗಳು ರಾಜಕೀಯವಾಗಿ ತಮ್ಮ ಸ್ಥಾನ ಉಳಿಸಿಕೊಳ್ಳುವ ಪ್ರಯತ್ನವಾಗಿದೆ. 'ಕುರ್ಚಿ ಹೋದರೂ ಪರವಾಗಿಲ್ಲ, ರೈತರ ಪರ ನಿಲ್ಲುತ್ತೇನೆ. ನೀರು ಬಿಡುವುದಿಲ್ಲ' ಎಂಬ ಸ್ಪಷ್ಟ ಘೋಷಣೆಯನ್ನು ಸಿಎಂ ಮಾಡಬೇಕು. ಅಂತಹ ನಿಲುವು ಪ್ರಕಟಿಸಿದರೆ ಬಿಜೆಪಿ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲು ಸಿದ್ಧವಿದೆ ಎಂದು ಹೇಳಿದರು.
ಬಿಜೆಪಿ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ರೈತರ ಹಕ್ಕುಗಳ ರಕ್ಷಣೆಗೆ ಬದ್ಧವಾಗಿದೆ. ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಸರ್ಕಾರವನ್ನು ಎಚ್ಚರಿಸುವ ಉದ್ದೇಶದಿಂದಲೇ ಈ ಪ್ರತಿಭಟನೆ ನಡೆಸಲಾಗಿದೆ. ಮುಂದೆಯೂ ರೈತರ ಹಿತಾಸಕ್ತಿಗಾಗಿ ಬಿಜೆಪಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಿದೆ ಎಂದು ಅವರು ತಿಳಿಸಿದರು.
ಈ ಮುಷ್ಕರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಮಾಜಿ ಸಂಸದೆ ಅಂಬರೀಶ್ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಭಾಗವಹಿಸಿದ್ದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್ನಿಂದ ಹಿಡಿದು ಇನ್ಸ್ಟಾ, ಎಕ್ಸ್, ಫೇಸ್ಬುಕ್, ಯೂಟ್ಯೂಬ್, ನ್ಯೂಸ್ ಆಪ್ವರೆಗೆ ಎಲ್ಲ ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.