ಪುತ್ತೂರು: ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನೂತನ ಶಾಲಾ ಕಟ್ಟಡದ ಉದ್ಘಾಟನೆ
ಪುತ್ತೂರಿನ ಪಟ್ಟೆಯಲ್ಲಿರುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಯು ಸುಮಾರು 75 ವರ್ಷಗಳ ಇತಿಹಾಸ ಹೊಂದಿದ್ದು, ದ್ವಾರಕಾ ಪ್ರತಿಷ್ಠಾನವು ಈ ವಿದ್ಯಾಸಂಸ್ಥೆಯನ್ನು ವಹಿಸಿಕೊಂಡ ಬಳಿಕ ಅಗತ್ಯ ಮೂಲಸೌಕರ್ಯ ಸೇರಿದಂತೆ ನೂತನ ಕಟ್ಟಡವನ್ನು ನಿರ್ಮಿಸಿಕೊಟ್ಟಿದೆ. ಜುಲೈ 9ರಂದು ಈ ಕಟ್ಟಡಗಳನ್ನು ದ್ವಾರಕಾ ಪ್ರತಿಷ್ಠಾನದ ಪ್ರಮುಖರು ಹಾಗೂ ಶಾಲಾ ಆಡಳಿತ ಮಂಡಳಿಯವರ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು.
ಪಟ್ಟೆ ಬಡಗನ್ನೂರು: ಸುಮಾರು 75 ವರ್ಷಗಳ ಇತಿಹಾಸ ಹೊಂದಿರುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಯನ್ನು ದ್ವಾರಕಾ ಪ್ರತಿಷ್ಠಾನವು ವಹಿಸಿಕೊಂಡಿದ್ದು, ಆ ನಂತರ ಈ ಪ್ರದೇಶಕ್ಕೆ ಒಂದು ಉತ್ತಮ ಶಿಕ್ಷಣ ವ್ಯವಸ್ಥೆ ಒದಗಿಸುವ ಕನಸು ಹಾಗೂ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂಬ ದೂರದೃಷ್ಟಿಯೊಂದಿಗೆ ಈ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟನೆ ಮಾಡುತ್ತಿದ್ದೇವೆ ಎಂದು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹೇಳಿದ್ದಾರೆ.
ಇಂದು ನಡೆದ ನೂತನ ಶಾಲಾ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಶಾಲೆಯಲ್ಲಿ ಮಕ್ಕಳ ಕಲಿಕೆಯ ಜತೆಗೆ ವ್ಯಕ್ತಿತ್ವ ವಿಕಸನಕ್ಕೂ ಪೂರಕವಾಗುವ ವಾತಾವರಣ ಹಾಗೂ ಮೂಲಸೌಕರ್ಯವನ್ನು ಒದಗಿಸುವಲ್ಲಿ ಸಂಸ್ಥೆ ಆಡಳಿತ ಮಂಡಳಿ ಬದ್ಧವಾಗಿದೆ ಎಂದು ಹೇಳಿದರು.
ಶ್ರೀ ಮಹಾಗಣಪತಿ ಹವನದೊಂದಿಗೆ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಊರಿನ ಗಣ್ಯ ವ್ಯಕ್ತಿಗಳು ಹಾಗೂ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.


