ಪುತ್ತೂರು: ವಿದ್ಯುತ್ ಪೂರೈಕೆಯಲ್ಲಿ ತೊಂದರೆ.. ಸರಿಪಡಿಸುವಂತೆ ಮನವಿ
Puttur: Power Supply Problem, Appeal To Fix It: ಪುತ್ತೂರು ನಗರ & ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯಾಗಿದೆ. ಈ ಹಿನ್ನೆಲೆ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಮೆಸ್ಕಾಂ ಇಲಾಖೆಯ ಶಾಖಾಧಿಕಾರಿ ಮತ್ತು ಕಾರ್ಯನಿರ್ವಾಹಕ ಎಂಜಿನಿಯರ್ನ್ನು ಭೇಟಿ ಮಾಡಿ, ಸಮಸ್ಯೆಗಳ ಕುರಿತು ಚರ್ಚಿಸಿ ಮನವಿ ಪತ್ರ ಸಲ್ಲಿಸಲಾಯಿತು.
ದಕ್ಷಿಣ ಕನ್ನಡ: ಪುತ್ತೂರು ನಗರ & ಗ್ರಾಮಾಂತರ ಪ್ರದೇಶಗಳಲ್ಲಿ ಕೆಲದಿನಗಳಿಂದ ವಿದ್ಯುತ್ ಸರಿಯಾಗಿ ಪೂರೈಕೆಯಾಗದೆ, ಜನ ಸಾಮಾನ್ಯರು ಪರದಾಡುತ್ತಿದ್ದಾರೆ. ಈ ಹಿನ್ನೆಲೆ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಬುಧವಾರ ಮೆಸ್ಕಾಂ ಇಲಾಖೆಯ ಶಾಖಾಧಿಕಾರಿ ಮತ್ತು ಕಾರ್ಯನಿರ್ವಾಹಕ ಎಂಜಿನಿಯರ್ನ್ನು ಭೇಟಿ ಮಾಡಿ, ಸಮಸ್ಯೆಗಳ ಕುರಿತು ಚರ್ಚಿಸಿ ಮನವಿ ಪತ್ರ ಸಲ್ಲಿಸಲಾಯಿತು.
ಲೋ-ವೋಲ್ವೇಜ್ ಹಾಗೂ ಕೆಲವು ಕಡೆಗಳಲ್ಲಿ ಸರಿಯಾಗಿ ವಿದ್ಯುತ್ ಸಂಪರ್ಕವಿಲ್ಲದೆ ಜನ ಸಾಮಾನ್ಯರು, ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಕುಡಿಯುವ ನೀರಿಗೂ ಸಮಸ್ಯೆಯಾಗುತ್ತಿದ್ದು, ದಿನನಿತ್ಯದ ಬದುಕಿಗೆ ತೊಂದರೆಯಾಗುತ್ತಿದೆ. ಮೆಸ್ಕಾಂ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಸರಿಯಾದ ಪ್ರತಿಕ್ರಿಯೆ ಬರುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ಆದಷ್ಟು ಬೇಗ, ಮೆಸ್ಕಾಂ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಸಮಸ್ಯೆಯನ್ನು ಪರಿಹರಿಸಬೇಕು. ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಂಭವವಿದ್ದು, ಇಲಾಖೆಯು ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳಬೇಕು. ಸರ್ಕಾರಕ್ಕೆ ಒತ್ತಡ ಹೇರಿ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಎರಡಕ್ಕಿಂತ ಹೆಚ್ಚು ಸಹಾಯವಾಣಿ ಸಂಪರ್ಕ ಸಂಖ್ಯೆ ಮೂಲಕ ಜನರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸಬೇಕು ಎಂದು ಒತ್ತಾಯಿಸಲಾಗಿದೆ.
ಜನ ಸಾಮಾನ್ಯರಿಗೆ ಎದುರಾಗಿರುವ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಪರಿಹರಿಸದೇ ಇದ್ದಲ್ಲಿ ಸ್ಥಳೀಯಾಡಳಿತ, ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಲೈನ್ಮ್ಯಾನ್ಗಳ ಕೊರತೆಯ ವಿರುದ್ಧ ಪುತ್ತೂರಿನ ಜನರ ಸಹಕಾರದೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಮನವಿ ಪತ್ರ ನೀಡಿ, ಎಚ್ಚರಿಸಲಾಗಿದೆ.
ಈ ವೇಳೆ ಟ್ರಸ್ಟಿನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಕಾರ್ಯದರ್ಶಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ, ಕೊಶಾಧಿಕಾರಿ ರೂಪೇಶ್ ನಾಯ್ಕ್ ಇದ್ದರು.


