ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು: ಸುರೇಶ್ ಶೆಟ್ಟಿ
Puttur: ಇಲ್ಲಿನ ಸುದಾನ ಸ್ಪೋರ್ಟ್ಸ್ ಕ್ಲಬ್ನಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.
ಪುತ್ತೂರು: ವಿದ್ಯಾರ್ಥಿಗಳು ಯಾವಾಗಲೂ ಗೆಲುವನ್ನೇ ನಿರೀಕ್ಷಿಸಬಾರದು. ಸೋತಾಗಲೂ ಅನುಭವ ದೊರೆಯುತ್ತದೆ. ಗೆಲುವು ಅನುಭವದ ಹಾದಿಯನ್ನು ಹೇಳಲು ನೆರವಾಗುತ್ತದೆ. ಪ್ರತಿ ಬಾರಿ ಸ್ಪರ್ಧಿಸುವಾಗಲೂ ಶಕ್ತಿ ಮೀರಿ ಪ್ರಯತ್ನಿಸಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ.ಸುರೇಶ ಶೆಟ್ಟಿ ಹೇಳಿದರು.
ಇಲ್ಲಿನ ಸುದಾನ ಸ್ಪೋರ್ಟ್ಸ್ ಕ್ಲಬ್ನಲ್ಲಿ ದಕ್ಷಿಣ ಕನ್ನಡ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ಸಂಯುಕ್ತಾಶ್ರಯದಲ್ಲಿ ಈಚೆಗೆ ಏರ್ಪಡಿಸಿದ್ದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಸೋಲು ಮತ್ತು ಗೆಲುವನ್ನು ಸಮಾನವಾಗಿ ಕಾಣಬೇಕು. ಶಟಲ್ ಆಟವು ವಿಶ್ವದ ಅತೀ ವೇಗವಾದ ಕ್ರೀಡೆಯಾಗಿದೆ. ಇದು ದೇಹ ಹಾಗೂ ಬುದ್ಧಿ ಒಂದೆಡೆ ಕೇಂದ್ರೀಕರಿಸುವಂತೆ ಮಾಡಲು ಸಹಕಾರಿಯಾಗಿದೆ. ಎಲ್ಲರು ತಮ್ಮ ಬುದ್ಧಿಶಕ್ತಿಯನ್ನು ಸರಿಯಾಗಿ ಬಳಸಿಕೊಂಡು ಆಟದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಸುದಾನ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಸಚ್ಚಿದಾನಂದ ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೇವಲ ಪಠ್ಯ ಶಿಕ್ಷಣ ಮಾತ್ರ ದೊರಕದೆ, ಆಟದಲ್ಲಿಯೂ ಸಮಾನವಾದ ಅವಕಾಶಗಳು ದೊರೆಯಬೇಕು. ಇದರಿಂದ ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿ ಸಾಧ್ಯವಿದೆ ಎಂದರು.
ವೇದಿಕೆಯಲ್ಲಿ ನೆಲ್ಲಿಕಟ್ಟೆ ಪದವಿ-ಪೂರ್ವ ವಿದ್ಯಾಲಯದ ಪ್ರಾoಶುಪಾಲ ಸತ್ಯಜಿತ್ ಉಪಾಧ್ಯಾಯ, ಬಪ್ಪಳಿಗೆ ವಸತಿಯುತ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಗಣೇಶ್ ಪ್ರಸಾದ್, ಉಪ ಪ್ರಾಂಶುಪಾಲ ಪ್ರದೀಪ್ ಕೆ ವೈ ಉಪಸ್ಥಿತರಿದ್ದರು. ಜೀವಶಾಸ್ತ್ರ ಉಪನ್ಯಾಸಕ ವಿಷ್ಣು ಪ್ರದೀಪ್ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.
ಫಲಿತಾಂಶ: ಬಾಲಕರ ವಿಭಾಗದಲ್ಲಿ ಸಂತ ಫಿಲೋಮಿನಾ ಕಾಲೇಜು ಪ್ರಥಮ ಸ್ಥಾನ ಪಡೆದರೆ, ಅಂಬಿಕಾ ಪದವಿ ಪೂರ್ವ ವಿದ್ಯಾಲಯ ದ್ವಿತೀಯ ಸ್ಥಾನ ಗಳಿಸಿತು. ಬಾಲಕಿಯರ ವಿಭಾಗದಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಪ್ರಥಮ ಹಾಗೂ ವಿವೇಕಾನಂದ ಪದವಿ ಪೂರ್ವ ವಿದ್ಯಾಲಯದ ತಂಡ ದ್ವಿತೀಯ ಸ್ತನವನ್ನು ಪಡೆಯಿತು.