ಮಳೆಗಾಲ: ಹೊಸ ಕಾಮಗಾರಿ ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ಸೂಚನೆ

ಈಗಾಗಲೇ ಕೈಗೆತ್ತಿಕೊಳ್ಳಲಾದ ವಿವಿಧ ಯೋಜನೆಗಳಲ್ಲಿ  ಅಗೆದಿರುವ ರಸ್ತೆಗಳನ್ನು ಕೂಡಲೇ  ಯಥಾ ಸ್ಥಿತಿಗೆ ತಂದು ಮುಗಿಸಬೇಕು. ಮಳೆ ನೀರಿನ ಸರಾಗ ಹರಿವಿಗೆ  ತೊಂದರೆಯಾಗಿರುವ ಒತ್ತುವರಿಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುವಂತೆ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು.

Jun 4, 2026 - 18:07
ಮಳೆಗಾಲ: ಹೊಸ ಕಾಮಗಾರಿ ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ಸೂಚನೆ
dakshina kannada Dc meeting with officials regarding mansoon preperations

ಮಂಗಳೂರು:ಮಳೆಗಾಲ ಆರಂಭವಾದ ಹಿನ್ನೆಲೆಯಲ್ಲಿ ಮಳೆಗಾಲದ ಅಗತ್ಯ ಕಾಮಗಾರಿ ಹೊರತುಪಡಿಸಿ ಯಾವುದೇ ಹೊಸ ರೀತಿಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ  ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.
      ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
      ಈಗಾಗಲೇ ಕೈಗೆತ್ತಿಕೊಳ್ಳಲಾದ ವಿವಿಧ ಯೋಜನೆಗಳಲ್ಲಿ  ಅಗೆದಿರುವ ರಸ್ತೆಗಳನ್ನು ಕೂಡಲೇ  ಯಥಾ ಸ್ಥಿತಿಗೆ ತಂದು ಮುಗಿಸಬೇಕು. ಮಳೆ ನೀರಿನ ಸರಾಗ ಹರಿವಿಗೆ  ತೊಂದರೆಯಾಗಿರುವ ಒತ್ತುವರಿಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುವಂತೆ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು.
      ಖಾಸಗಿ ಕಟ್ಟಡ ಕಾಮಗಾರಿ  ನಿರ್ಮಾಣ ಸಾಮಗ್ರಿಗಳನ್ನು  ಮತ್ತು ಅವಶೇಷಗಳನ್ನು ರಸ್ತೆ ಬದಿ ಹಾಗೂ ಫುಟ್‍ಪಾತ್‍ನಲ್ಲಿ  ಹಾಕಿರುವುದನ್ನು  ಕೂಡಲೇ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಅಪಾಯಕಾರಿ ಮರಗಳನ್ನು ಕೂಡಲೇ ತೆರವುಗೊಳಿಸಬೇಕು. ತೀವ್ರ ಮಳೆಯಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆಯನ್ನು  48 ಗಂಟೆಯೊಳಗೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
       ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲದ ಸಿದ್ಧತೆಗೆ ನೇಮಕವಾಗಿರುವ ವಾರ್ಡುವಾರು ಇನ್ಸಿಡೆಂಟ್ ಕಮಾಂಡರ್‍ಗಳು ಸಾರ್ವಜನಿಕರ ಸೇವೆಗೆ ಸದಾ ಲಭ್ಯವಿರಬೇಕು.  ತಮ್ಮ ವಾರ್ಡಿನಲ್ಲಿ ಪ್ರತಿಯೊಂದು ಸ್ಥಳಕ್ಕೂ ಭೇಟಿ ನೀಡಿ ಮಳೆಹಾನಿ ನಿಯಂತ್ರಿಸಲು ಈಗಿಂದಲೇ ಗಮನಹರಿಸಬೇಕು. ಯಾವುದೇ ಅನಾಹುತ ಸಂಭವಿಸಿದರೆ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
       ಅರಣ್ಯ, ಅಗ್ನಿಶಾಮಕ, ಕಂಟ್ರೋಲ್ ರೂಮ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ  ಸಾಧಿಸಬೇಕು ಎಂದು ಸೂಚಿಸಿದರು. ಯುಜಿಡಿ ಬ್ಲಾಕ್ ಆಗಿ ನೀರು ಬರುವಂತಹ ಸನ್ನಿವೇಶವನ್ನು  ತಪ್ಪಿಸಬೇಕು. ಹೆದ್ದಾರಿ ಮತ್ತು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಅರ್ಧ ಗಂಟೆಯಲ್ಲಿ ತೆರವುಗೊಳಿಸಬೇಕು ಎಂದು ತಿಳಿಸಿದರು.
       ಅಪರ ಜಿಲ್ಲಾಧಿಕಾರಿ  ರಾಜು ಕೆ   ಮಾತನಾಡಿ, ಮಳೆಗಾಲ ಮತ್ತು ವಿಪತ್ತು ನಿರ್ವಹಣೆಗೆ  ನೇಮಕವಾದ ಸರಕಾರಿ ನೌಕರರು ಕರ್ತವ್ಯ ನಿರ್ಲಕ್ಷ್ಯ ತೋರಿದರೆ  ಅವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
       ಸಭೆಯಲ್ಲಿ ಉಪ ಪೆÇೀಲಿಸ್ ಆಯುಕ್ತ  ಮಿಥುನ್ ಹೆಚ್ ಎನ್, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್  ಮತ್ತಿತರರು ಉಪಸ್ಥಿತರಿದ್ದರು.

ಬಾಲಕಾರ್ಮಿಕರ ರಕ್ಷಣೆಗೆ ಅನಿರೀಕ್ಷಿತ ದಾಳಿ, ತಪಾಸಣೆ  ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು, ಜೂ.04 (ಕ.ವಾ):-  ಅಂಗಡಿಗಳು,  ಕಾರ್ಖಾನೆಗಳಿಗೆ, ತೋಟಗಳು, ಇತರೆ ಕೃಷಿ ಸೇರಿದಂತೆ ಅಥವಾ ಅಪಾಯಕಾರಿ  ಕೆಲಸಗಳಲ್ಲಿ ಬಾಲಕಾರ್ಮಿಕರನ್ನು ತೊಡಗಿಸಿಕೊಳ್ಳದಂತೆ ನಿಯಮಿತ ದಾಳಿ ನಡೆಸಿ, ತಪಾಸಣೆಯನ್ನು ಹೆಚ್ಚಿಸಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ  ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.
     ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ ಹಾಗೂ ಟಾಸ್ಕ್ ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
     ಬಾಲಕಾರ್ಮಿಕ ಪದ್ಧತಿ ಕುರಿತು ಕಾನೂನು ಅರಿವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಜಾಗೃತಿ ಮೂಡಿಸಬೇಕು. ಜಿಲ್ಲಾ ಮತ್ತು  ತಾಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ನಿಯಮಿತವಾಗಿ ನಡೆಸಲು ಅವರು ಸೂಚಿಸಿದರು. 
    18 ವರ್ಷದೊಳಗಿನ ಮಕ್ಕಳನ್ನು ಬಾಲಕಾರ್ಮಿಕರು ಅಥವಾ ಕಿಶೋರಕಾರ್ಮಿಕರನ್ನಾಗಿ ಕೆಲಸಕ್ಕೆ ನೇಮಿಸಿಕೊಳ್ಳದಂತೆ, ಬಾಲಕಾರ್ಮಿಕ ನಿಷೇಧದ ಬಗ್ಗೆ ಲೋಗೋವನ್ನು ರಚಿಸಿ,  ಎಲ್ಲಾ ಸಂಸ್ಥೆಗಳಲ್ಲಿ  ಸಾರ್ವಜನಿಕವಾಗಿ ಪ್ರದರ್ಶಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು. 
    ಎಲ್ಲಾ ಕಾರ್ಖಾನೆ, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆಯ ಸಾರಾಂಶವನ್ನು ಕಡ್ಡಾಯವಾಗಿ ಪ್ರದರ್ಶಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪತ್ತೆ ಹಚ್ಚಿದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ನೇಮಿಸಿಕೊಂಡ ತಪ್ಪಿತಸ್ಥ ಮಾಲೀಕರ ವಿರುದ್ಧ ಮೊಕದ್ದಮೆ ಹೂಡಿರುವ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಕ್ರಮ ವಹಿಸುವಂತೆ ತಿಳಿಸಿದರು.
    ಬಾಲಕಾರ್ಮಿಕ ಕಾಯ್ದೆ, ತಂಬಾಕು ನಿಯಂತ್ರಣ ಕಾಯ್ದೆ, ಮಾದಕ ವಸ್ತುಗಳ ದುಷ್ಪರಿಣಾಮ ಮತ್ತು ಮಾನವ ಕಳ್ಳ ಸಾಗಾಣಿಕೆ ತಡೆ ಕಾಯ್ದೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಶಾಲಾ ಕಾಲೇಜು, ಕಾರ್ಖಾನೆಗಳು ಹಾಗೂ ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಸಂಬಂಧಿಸಿದ ಇಲಾಖೆಗಳ ಸಹಕಾರದೊಂದಿಗೆ ಒಟ್ಟು 72 ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿರುತ್ತದೆ. 2025-26ನೇ ಸಾಲಿನಲ್ಲಿ ದ.ಕ ಜಿಲ್ಲೆಯಾದ್ಯಂತ ಒಟ್ಟು  1487 ಅನಿರೀಕ್ಷಿತ ತಪಾಸಣೆಗಳನ್ನು ನಡೆಸಿದ್ದು, 5 ಬಾಲಕಾರ್ಮಿಕರು ಹಾಗೂ 23 ಕಿಶೋರ ಕಾರ್ಮಿಕರು ಒಟ್ಟು 28 ಪ್ರಕರಣಗಳಲ್ಲಿ 3 ಬಾಲಕಾರ್ಮಿಕ ನಿμÉೀಧ ಕಾಯ್ದೆಯಡಿ ಹಾಗೂ 1 ಕಿಶೋರ ಕಾರ್ಮಿಕ ಅಪಾಯಕಾರಿ ಉದ್ದಿಮೆಯಲ್ಲಿ ಮತ್ತು 13 ಕಿಶೋರ ಕಾರ್ಮಿಕ ನಿಯಂತ್ರಣ ಕಾಯ್ದೆಯಡಿ (ಅಪಾಯಕಾರಿ ಅಲ್ಲದ) ಸಂಸ್ಥೆಗಳಲ್ಲಿ ಮಕ್ಕಳನ್ನು ರಕ್ಷಿಸಲಾಗಿರುತ್ತದೆ ಮತ್ತು 5 ಪ್ರಕರಣಗಳಲ್ಲಿ ತಪ್ಪಿತಸ್ಥ ಮಾಲೀಕರಿಂದ ರೂ. 1 ಲಕ್ಷ ಕಾರ್ಪಸ್ ನಿಧಿ ವಸೂಲಾತಿ ಆಗಿರುವ ಬಗ್ಗೆ ಹಾಗೂ 'ಘನ ನ್ಯಾಯಾಲಯವು  2 ಪ್ರಕರಣದಲ್ಲಿ ರೂ. 11 ಸಾವಿರ  ದಂಡ ವಿಧಿಸಿರುತ್ತದೆ ಎಂದು ಕಾರ್ಮಿಕ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
    ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.