Karnataka Rain: ರಾಜ್ಯದ ವಿವಿಧೆಡೆ ಮಳೆ.. ದಕ್ಷಿಣ ಕನ್ನಡದಲ್ಲಿ ರಜೆ ಘೋಷಣೆ
Karnataka Rain: ರಾಜ್ಯದ ವಿವಿಧೆಡೆ ಮತ್ತೆ ವರುಣಾರ್ಭಟ ಶುರುವಾಗಿದೆ. ಇಂದು (ಜುಲೈ 23) ಮತ್ತು ನಾಳೆ (ಜುಲೈ 24) ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು: ರಾಜ್ಯದ ವಿವಿಧೆಡೆ ಮತ್ತೆ ವರುಣಾರ್ಭಟ ಶುರುವಾಗಿದೆ. ಇಂದು (ಜುಲೈ 23) ಮತ್ತು ನಾಳೆ (ಜುಲೈ 24) ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಬಳ್ಳಾರಿ ಮತ್ತು ವಿಜಯನಗರದಲ್ಲಿ ಉತ್ತಮ ಮಳೆಯಾಗಲಿದೆ. ಈ ಹಿನ್ನೆಲೆ, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡದ ಶಾಲಾ-ಕಾಲೇಜಿಗೆ ರಜೆ ಘೋಷಣೆ:
ಭಾರೀ ಮಳೆಯಾಗುತ್ತಿರುವ ಕಾರಣ, ಇಂದು (ಜುಲೈ 23) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ನೀಡಿ ಜಿಲ್ಲಾಧಿಕಾರಿ ದರ್ಶನ್ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಎಡೆಬಿಡದೆ ಮಳೆಯಾಗುತ್ತಿದೆ.
ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ನಿರ್ಬಂಧ:
ವಿಪರೀತವಾಗಿ ಮಳೆಯಾಗುತ್ತಿದ್ದು, ಸಮುದ್ರದ ಅಲೆಗಳ ತೀವ್ರತೆ ಹೆಚ್ಚಾಗಿದೆ. ಹೀಗಾಗಿ, ಮೀನುಗಾರರು ಕಡಲಿಗೆ ಇಳಿಯದಂತೆ ನಿರ್ಬಂಧಿಸಲಾಗಿದೆ. ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ, ಸಮುದ್ರ ತೀರಗಳಿಗೆ ತೆರಳಬಾರದು ಎಂದು ಸೂಚಿಸಲಾಗಿದೆ.
ಜೊಯಿಡಾ ತಾಲೂಕಿನಲ್ಲೂ ರಜೆ:
ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನಲ್ಲಿ ಎಲ್ಲ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆ:ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಠ 28 ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣದೊಂದಿಗೆ ಲಘು ಮಳೆಯಾಗುವ ಸಾಧ್ಯತೆಯಿದೆ.