Tumakuru Dasara-2026: ಲಾಂಛನ ಬಿಡುಗಡೆಗೊಳಿಸಿದ ಡಿಸಿಎಂ ಡಾ. ಜಿ.ಪರಮೇಶ್ವರ
Tumkur Dasara-2026: ತುಮಕೂರು ದಸರಾ ಉತ್ಸವದ ಲಾಂಛನವನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅನಾವರಣಗೊಳಿಸಿದರು.
ತುಮಕೂರು: ಈ ಬಾರಿಯ ತುಮಕೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲಾಗುವುದು. ವಸ್ತುಪ್ರದರ್ಶನದಲ್ಲಿ ಎಐ, ಆಧುನಿಕ ತಂತ್ರಜ್ಞಾನ ಅಭಿವೃದ್ಧಿ ಬಗ್ಗೆ ಅವಕಾಶ ಕಲ್ಪಿಸಲಾಗುವುದು. ಸುಮಾರು 2000ಕ್ಕೂ ಹೆಚ್ಚು ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ (Dr.G.Parameshwara) ಹೇಳಿದರು.
ನಗರದ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿಂದು ತುಮಕೂರು ದಸರಾ ಉತ್ಸವದ ಲಾಂಛನವನ್ನು ಅನಾವರಣಗೊಳಿಸಿ, ಮಾತನಾಡಿದರು.
ಮಹಾನವಮಿ ಹಬ್ಬ ನಮ್ಮ ಜೀವನದಲ್ಲಿ ಅನೇಕ ಪಾಠಗಳನ್ನು ಕಲಿಸುತ್ತದೆ. ತುಮಕೂರು ದಸರಾ ಉತ್ಸವ ಜಿಲ್ಲೆಯ ಸಂಸ್ಕೃತಿ, ನಾಗರೀಕತೆ, ಪರಂಪರೆ, ಇತಿಹಾಸವನ್ನು ಪ್ರತಿಬಿಂಬಿಸುತ್ತದೆ. ಎಲ್ಲರೂ ಭಾಗವಹಿಸಬೇಕು. ತುಮಕೂರಿಗೆ ಕೀರ್ತಿ ತರುವ ರೀತಿಯಲ್ಲಿ ದಸರಾ ಉತ್ಸವ ಆಚರಿಸೋಣ ಎಂದು ತಿಳಿಸಿದರು.
'ತುಮಕೂರು ದಸರಾ ಉತ್ಸವ-2026' ಕಾರ್ಯಕ್ರಮವು ಅಕ್ಟೋಬರ್ 11 ರಿಂದ ಅಕ್ಟೋಬರ್ 21ರವರೆಗೆ ನಡೆಯಲಿದೆ. ಈ ವರ್ಷದ ತುಮಕೂರು ದಸರಾ ಉತ್ಸವದ ಬಗ್ಗೆ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೂ ತರಲಾಗಿದೆ. ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು, ಬಿಡುವು ಮಾಡಿಕೊಂಡು ಆಗಮಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಈ ವೇಳೆ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಬಿ.ವಿ.ಅಶ್ವಿಜಾ, ಮಹಾನಗರ ಪಾಲಿಕೆ ಆಯುಕ್ತೆ ಶುಭ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಇದ್ದರು.