ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ-ಸಿಎಂ ಡಿಕೆಶಿ  

ರಾಮಲಿಂಗಾರೆಡ್ಡಿ ನಮ್ಮ ಸ್ನೇಹಿತರು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ ಎಂದ ಮುಖ್ಯಮಂತ್ರಿ,  ಪ್ರಧಾನಮಂತ್ರಿಗಳನ್ನು ಭೇಟಿ ಮಾಡುವೆ; ರಾಜಕೀಯ ಬಿಟ್ಟು ರಾಜ್ಯದ ಜನರ ಹಿತಕ್ಕಾಗಿ ಕೆಲಸ ಮಾಡೋಣ ಎಂದ ಶಿವಕುಮಾರ್

Jun 6, 2026 - 16:00
Jun 6, 2026 - 16:03
ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ-ಸಿಎಂ ಡಿಕೆಶಿ   

ಬೆಂಗಳೂರು, ಜೂನ್‌ 6: “ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜಿನಾಮೆ ಅಂಗೀಕರಿಸುವುದಿಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್  ಹೇಳಿದರು.

ವಿಧಾನಸೌಧದಲ್ಲಿ ಶನಿವಾರ ಮಾಜಿ ಸಿಎಂ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಶುಕ್ರವಾರ ರಾತ್ರಿ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ವಿಚಾರವಾಗಿ ಕೇಳಿದಾಗ, “ಅನಗತ್ಯವಾಗಿ ತಲೆಕೆಡಿಸಿಕೊಂಡು ಏನೇನೋ ಸ್ಟೋರಿ ಮಾಡಬೇಡಿ. ಅವರು ರಾಜಿನಾಮೆಯನ್ನು ವಾಟ್ಸಪ್ ನಲ್ಲಿ ಕಳಿಸಿಕೊಟ್ಟಿದ್ದು ನಿಜ. ಈಗ ಆ ವಿಚಾರ ಬಗೆಹರಿಸಲಾಗಿದೆ” ಎಂದು ತಿಳಿಸಿದರು.

ರಾಜ್ಯಸಭೆಗೆ 3, ವಿಧಾನ ಪರಿಷತ್ತಿಗೆ ಐವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ:

ಇಂದು ನಾವು ಎಲ್ಲಾ ಐವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ. ರಾಜ್ಯ ಸಭೆ ಚುನಾವಣೆಗೆ 3 ಹಾಗೂ ವಿಧಾನ ಪರಿಷತ್ ಚುನಾವಣೆಗೆ 5 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ನಿನ್ನೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾದ ಪವನ್ ಖೇರಾ ಅವರನ್ನು ನಮ್ಮ ರಾಜ್ಯದಿಂದ ಕಣಕ್ಕೆ ಇಳಿಸಲಾಗಿದೆ. ಜೊತೆಗೆ ಎಐಸಿಸಿ ಕಾರ್ಯದರ್ಶಿ, ಯುವ ಮುಖಂಡ ಮನ್ಸೂರ್ ಅಲಿ ಖಾನ್ ಅವರಿಗೂ ಅವಕಾಶ ನೀಡಿದ್ದೇವೆ. ಕೆಪಿಸಿಸಿ ಅಧ್ಯಕ್ಷರೂ ಸೇರಿದಂತೆ ವಿಧಾನ ಪರಿಷತ್ ಚುನಾವಣೆಯ ಎಲ್ಲ ಐದು ಸ್ಥಾನಗಳಿಗೂ ಕಾಂಗ್ರೆಸ್ ಕಾರ್ಯಕರ್ತರಿಗೇ ಅವಕಾಶ ನೀಡಲಾಗಿದೆ” ಎಂದರು.

ರಾಜಕೀಯ ಬಿಟ್ಟು ರಾಜ್ಯದ ಜನರ ಹಿತಕ್ಕಾಗಿ ಕೆಲಸ ಮಾಡೋಣ

ಸಿದ್ದರಾಮಯ್ಯ ಅವರ ಸರಕಾರದ ವಿರುದ್ಧ ಜನರ ಆಕ್ರೋಶದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸಿಎಂ ಬದಲಾವಣೆಯಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಶುಭ ಕೋರಿದ್ದಾರೆ. ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಾನು ಗೌರವಯುತವಾಗಿ ಹೋಗಿ ಅವರನ್ನು ಭೇಟಿ ಮಾಡುವೆ. ಅವರು ರಾಜಕಾರಣ ಮಾಡುವುದು ಬೇಡ, ನಾವು ರಾಜಕಾರಣ ಮಾಡುವುದು ಬೇಡ. ರಾಜ್ಯದ ಜನತೆಯ ಹಿತಕ್ಕಾಗಿ ನಾವು ಎಲ್ಲರೂ ಸೇರಿ ಏನು ಕೆಲಸ ಮಾಡಬೇಕೋ ಅದನ್ನು ಮಾಡೋಣ” ಎಂದು ತಿಳಿಸಿದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.