ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ಕೊರತೆ: ಕೇಂದ್ರಕ್ಕೆ ಸಿಎಂ ಪತ್ರ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಬೆಂಗಳೂರಿನ ಮೇಲೂ ತಟ್ಟಿದ್ದು, ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಕೊರತೆಯಾಗಿದೆ. ಗೃಹಬಳಕೆಗೆ ಆದ್ಯತೆ ನೀಡಿದ ಕೇಂದ್ರದ ಆದೇಶದಿಂದ ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ಸಂಕಷ್ಟಕ್ಕೆ ಸಿಲುಕಿದ್ದು, ಕೇಂದ್ರ ಸರ್ಕಾರ ತಕ್ಷಣವೇ ಮಧ್ಯ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಇತ್ತೀಚೆಗೆ ಹೊರಡಿಸಿದ ಆದೇಶದ ಹಿನ್ನೆಲೆಯಲ್ಲಿ ಎಲ್ಪಿಜಿ ಉತ್ಪಾದನೆಗೆ ಗೃಹ ಬಳಕೆಗೆ ಆದ್ಯತೆ ನೀಡಲಾಗುತ್ತಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಪೂರೈಕೆಗೆ ಮೇಲೆ ಭಾರಿ ಹೊಡೆತ ಬಿದ್ದಿದ್ದು, ಹೋಟೆಲ್ ಹಾಗೂ ರೆಸ್ಟೋರೆಂಟ್ಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಪತ್ರದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.
ಬೆಂಗಳೂರಿನ ಹಲವು ಹೋಟೆಲ್ ಮತ್ತು ರೆಸ್ಟೋರೆಂಟ್ಗಳು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಹಲವಾರು ಹೋಟೆಲ್ಗಳು ತಾತ್ಕಾಲಿಕವಾಗಿ ಕಾರ್ಯಾಚರಣೆ ಸ್ಥಗಿತಗೊಳಿಸುವ ಪರಿಸ್ಥಿತಿ ಎದುರಾಗಬಹುದು ಎಂಬ ಆತಂಕವನ್ನೂ ಅವರು ವ್ಯಕ್ತಪಡಿಸಿದ್ದಾರೆ.
ಕಮರ್ಷಿಯಲ್ ಸಿಲಿಂಡರ್ ಪೂರೈಕೆ ವ್ಯತ್ಯಯದಿಂದ ಲಕ್ಷಾಂತರ ಜನರ ಮೇಲೆ ಪರಿಣಾಮ
ಬೆಂಗಳೂರು ನಗರದಲ್ಲಿ ಸಾವಿರಾರು ಸಣ್ಣ ಹೋಟೆಲ್ಗಳು, ಮೆಸ್ಸುಗಳು ಮತ್ತು ಕೇಟರಿಂಗ್ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿದಿನ ಲಕ್ಷಾಂತರ ಜನರು ಇವುಗಳ ಮೇಲೆ ಅವಲಂಬಿತರಿದ್ದಾರೆ. ವಿದ್ಯಾರ್ಥಿಗಳು ಹಾಗೂ ಉದ್ಯೋಗಕ್ಕಾಗಿ ಹೊರನಗರಗಳಿಂದ ಬಂದಿರುವ ಅನೇಕರು ದಿನನಿತ್ಯದ ಆಹಾರಕ್ಕಾಗಿ ಇಂತಹ ಹೋಟೆಲ್ ಮತ್ತು ಮೆಸ್ಸುಗಳನ್ನೇ ನಂಬಿಕೊಂಡಿದ್ದಾರೆ ಎಂದು ಸಿಎಂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸಾಮಾನ್ಯವಾಗಿ ರಾಜ್ಯದ ಕಮರ್ಷಿಯಲ್ ಎಲ್ಪಿಜಿ ಬೇಡಿಕೆಯನ್ನು ತೈಲ ಮಾರುಕಟ್ಟೆ ಕಂಪನಿಗಳಾದ IOCL, HPCL ಮತ್ತು BPCL ಮೂಲಕ ಪೂರೈಸಲಾಗುತ್ತದೆ. ಇದರಲ್ಲಿ ಐಒಸಿಎಲ್ ಪ್ರತಿದಿನ ಸುಮಾರು 500–550 ಮೆಟ್ರಿಕ್ ಟನ್, ಎಚ್ಪಿಸಿಎಲ್ 300 ಮೆಟ್ರಿಕ್ ಟನ್ ಮತ್ತು ಬಿಪಿಸಿಎಲ್ 230 ಮೆಟ್ರಿಕ್ ಟನ್ ವರೆಗೆ ಪೂರೈಕೆ ಮಾಡುತ್ತಿತ್ತು. ಆದರೆ ಈ ಪೂರೈಕೆಯಲ್ಲಿ ಉಂಟಾದ ಅಚಾನಕ್ ವ್ಯತ್ಯಯದಿಂದ ಈಗ ಬಳಕೆದಾರರಿಗೆ ದೊಡ್ಡ ಸಮಸ್ಯೆ ಎದುರಾಗಿದೆ ಎಂದು ಸಿಎಂ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೋಟೆಲ್ ಹಾಗೂ ಕೇಟರಿಂಗ್ ಉದ್ಯಮಕ್ಕೆ ಅಗತ್ಯವಿರುವ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಪೂರೈಕೆಯನ್ನು ಶೀಘ್ರದಲ್ಲೇ ಪುನಃಸ್ಥಾಪಿಸಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ವಿನಂತಿಸಿದ್ದಾರೆ.
ಒಟ್ಟಿನಲ್ಲಿ, ವಾಣಿಜ್ಯ ಎಲ್ಪಿಜಿ ಕೊರತೆಯಿಂದ ಬೆಂಗಳೂರಿನ ಹೋಟೆಲ್ ಉದ್ಯಮ ಮಾತ್ರವಲ್ಲದೆ ವಿದ್ಯಾರ್ಥಿಗಳು, ಉದ್ಯೋಗಿಗಳು ಮತ್ತು ಸಾಮಾನ್ಯ ಜನರ ದಿನನಿತ್ಯದ ಬದುಕಿನ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.


