ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಮೋದಿಗೆ ಸಿಎಂ ಪತ್ರ
ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ
ದೆಹಲಿ/ಬೆಂಗಳೂರು: ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು ಬರೆದಿರುವ ಪತ್ರದಲ್ಲಿ, ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ, ರಾಜಕೀಯ ಉದ್ವಿಗ್ನತೆ ಮತ್ತು ವಿಮಾನಯಾನ ನಿರ್ಬಂಧಗಳಿಂದಾಗಿ ಅಲ್ಲಿರುವ ಕನ್ನಡಿಗರು ಹಾಗೂ ಇತರ ಭಾರತೀಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಖ್ಯವಾಗಿ ಯುಎಇ (ದುಬೈ) ನಂತಹ ಸ್ಥಳಗಳಲ್ಲಿ ಅನೇಕರು ಸಿಲುಕಿಕೊಂಡಿದ್ದಾರೆ. ಸಿಲುಕಿರುವವರನ್ನು ಸುರಕ್ಷಿತವಾಗಿ ಕರೆತರಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ಸಚಿವಾಲಯದೊಂದಿಗೆ ಸಮನ್ವಯ ಸಾಧಿಸುವಂತೆ ತಿಳಿಸಿದ್ದಾರೆ.
ಭಾರತೀಯ ರಾಯಭಾರ ಕಚೇರಿಗಳ ಮೂಲಕ ಅಲ್ಲಿನ ಜನರಿಗೆ ನಿರಂತರ ಮಾರ್ಗದರ್ಶನ ಮತ್ತು ರಕ್ಷಣೆ ನೀಡುವುದು. ಅಗತ್ಯವಿದ್ದರೆ ಭಾರತೀಯರನ್ನು ಕರೆತರಲು ವಿಶೇಷ ವಿಮಾನಗಳ ವ್ಯವಸ್ಥೆ ಮಾಡುವುದು. ವಿವಿಧ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳ ನಡುವೆ ಸುಗಮ ಸಂವಹನಕ್ಕಾಗಿ ವಿಶೇಷ ಕಾರ್ಯಪಡೆ ರಚಿಸುವುದು. ಸಂಕಷ್ಟದಲ್ಲಿರುವವರನ್ನು ಪತ್ತೆಹಚ್ಚಲು ಮತ್ತು ಅವರ ಕುಟುಂಬಗಳಿಗೆ ಮಾಹಿತಿ ನೀಡಲು ಕೇಂದ್ರೀಕೃತ ಡಿಜಿಟಲ್ ವ್ಯವಸ್ಥೆ ರೂಪಿಸುವುದು. ಟಿಕೆಟ್ ಮರುಹೊಂದಾಣಿಕೆ ಮತ್ತು ದಂಡ ವಿಧಿಸದಂತೆ ವಿಮಾನಯಾನ ಸಂಸ್ಥೆಗಳಿಗೆ ಸೂಚಿಸುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕ ಸರ್ಕಾರವು ಈಗಾಗಲೇ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರವನ್ನು 24/7 ಸಕ್ರಿಯಗೊಳಿಸಿದೆ ಮತ್ತು ದೆಹಲಿಯಲ್ಲಿರುವ ಕರ್ನಾಟಕ ಭವನದ ಅಧಿಕಾರಿಗಳ ಮೂಲಕ ಕೇಂದ್ರದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಪಶ್ಚಿಮ ಏಷ್ಯಾದಲ್ಲಿರುವ ಭಾರತೀಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅವರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.


